ಧ
ಬೆಳ್ತಂಗಡಿ: ಹಾಡಹಗಲೇ ಮನೆಯಲ್ಲಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಶನಿವಾರ ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದ್ದು ಸಂಬಂಧಿಯೊಬ್ಬನ ಮೇಲೆಯೇ ಪೊಲೀಸರ ಅನುಮಾನ ನೆಟ್ಟಿದೆ.
ದರೋಡೆಕೋರರಿಂದ ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85ವ) ಎಂಬವರೇ ಈ ರೀತಿ ದಾರುಣವಾಗಿ ಕೊನೆಯುಸಿರೆಳೆದವರು.
ಗಂಭೀರ ಹಲ್ಲೆಗೊಳಗಾದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ.
ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದು, ಮಗ ಮತ್ತು ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ನಂತರ ಹೊರಗಡೆ ಬಂದು ನೋಡಿದಾಗ ಅವರು ತಮ್ಮ ಮನೆಯ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು ಕಂಡು ಬಂದು ಭಯಗೊಂಡ ಮಗು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಈ ವೇಳೆ ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದರು. ಬಳಿಕ ಪರಿಶೀಲಿಸಿದಾಗ ಅವರ ಕಿವಿಯಲ್ಲಿದ್ದ ಚಿನ್ನದ ಆಭರಣ ಕಿತ್ತುಕೊಂಡಿರುವುದು ಗೋಚರಿಸಿದೆ. ಮನೆಯ ಒಳಗೆ ಹೋಗಿ ನೋಡಿದಾಗ ಮನೆಯಲ್ಲಿದ್ದ ನಗದನ್ನೂ ಕೂಡ ಕಳವುಗೈದಿರುವುದು ತಿಳಿದುಬಂದಿದೆ.
ಇದು ಮನೆಯಲ್ಲಿ ಅಜ್ಜಿ ಮಾತ್ರ ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡಿದ್ದ ದುಷ್ಕರ್ಮಿಗಳು ವ್ಯವಸ್ಥಿತವಾಗಿ ಈಕೃತ್ಯ ಎಸಗಿರುವ ಬಗ್ಗೆ ಆರಂಭದಲ್ಲೇ ಬಲವಾದ ಸಂದೇಹ ಮೂಡಿದೆ.
ಘಟನೆ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಕಡಿರುದ್ಯಾವರದ ಯುವಕನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿಯೂ ಇದೆ.